ಬೆಂಗಳೂರು: ರಾಜ್ಯದಲ್ಲಿನ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಅಸ್ತಿತ್ವಕ್ಕೆ ತರಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಂಡರೆ, ಪಿಯು ಶೈಕ್ಷಣಿಕ ಚಟುವಟಿಕೆಯನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ನೋಡಿಕೊಳ್ಳುತ್ತಿದೆ. ಶೀಘ್ರವೇ ಇವೆರಡನ್ನೂ ವಿಲೀನಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿನ ದೀರ್ಘಕಾಲದ ಬೇಡಿಕೆ ಇದು. ಮುಂದೆ ಅಸ್ತಿತ್ವಕ್ಕೆ ಬರಲಿರುವ ಏಕರೂಪ ಮಂಡಳಿಯು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳೆರಡನ್ನೂ ನಡೆಸಲಿದೆ. ದೇಶದ ಹಲವು ರಾಜ್ಯಗಳಲ್ಲಿ ಒಂದೇ ಪರೀಕ್ಷಾ ಮಂಡಳಿ ಇದೆ. ರಾಜ್ಯದಲ್ಲಿಯೂ ಅದೇ ವ್ಯವಸ್ಥೆ ತರಲು ಉದ್ದೇಶಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಸಂಬಂಧಿಸಿದಂತೆ ನೀತಿ ನಿರೂಪಣೆಗಳು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಅನುಷ್ಠಾನಗೊಳಿಸಲು ಪ್ರಾಥಮಿಕ ಶಿಕ್ಷಣ ಪರಿಷತ್ ರಚನೆ ಮಾಡಲಾಗುವುದು’ ಎಂದು ಸುರೇಶ್ಕುಮಾರ್ ತಿಳಿಸಿದರು. ‘ಶಿಕ್ಷಣ ವ್ಯವಸ್ಥೆಯಲ್ಲಿ ವಿವಿಧ ಆಯಾಮಗಳಿವೆ. ಬೇರೆ ಬೇರೆ ಆಯಾಮದ ಶೈಕ್ಷಣಿಕ ಉದ್ದೇಶಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಪರಿಷತ್ ಕಾರ್ಯನಿರ್ವಹಿಸಲಿದೆ. ಈ ಪರಿಷತ್ ತಜ್ಞರ ಸಮಿತಿಯನ್ನು ಒಳಗೊಂಡಿರುತ್ತದೆ’ ಎಂದರು.