ನೌಕರರು ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಸಕಾರತ್ಮಕವಾಗಿ ಸ್ಪಂಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸರ್ಕಾರಿ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ಜಿಲ್ಲಾ ಜಂಟಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಮನವಿಗಳನ್ನು ಪರಿಶೀಲಿಸಿ ಸರ್ಕಾರಿ ನೌಕರರಿಗೆ ಸಿಗಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಈ.ಕೃಷ್ಣೇಗೌಡ ಅವರು ಜಿಲ್ಲೆಯಲ್ಲಿ ಸರ್ಕಾರಿ ನೌಕರರು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಪ್ರಸ್ತಾಪಿಸಿದರು ಹಾಗೂ ತಾಲ್ಲೂಕು ಸಂಘದ ಅಧ್ಯಕ್ಷರುಗಳು ಸಹ ಅವರವರ ತಾಲ್ಲೂಕಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು.
ಸಂಘಕ್ಕೆ ಸುಸಜ್ಜಿತ ನೌಕರರ ಭವನ ಹಾಗೂ ಸಮುದಾಯ ಭವನ ನಿರ್ಮಿಸಲು ಒಂದು ಎಕರೆ ಜಾಗವನ್ನು ಸರ್ಕಾರದಿಂದ ಮಂಜೂರು ಮಾಡಿಸುವಂತೆ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಹುಡಾದಿಂದ ಸಿ.ಎ ಜಾಗವನ್ನು ಮಂಜೂರು ಮಾಡಲು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯಿಂದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಸಲು ಮಂಜೂರಾಗುತ್ತಿರುವ ಅನುದಾನ 1 ಲಕ್ಷವನ್ನು 2.5 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಪ್ರಸ್ತಾಪಿಸಲಾಗಿ ಜಿಲ್ಲಾಧಿಕಾರಿ ಅವರು ಸಕಾರಾತ್ಮಕವಾಗಿ ಸ್ಪಂಧಿಸಿ ಜಿಲ್ಲಾ ಪಂಚಾಯತ್ ಅಧಿಕಾರಿಯವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗರ್ಭಿಣಿ ಸ್ತ್ರೀಯರಿಗೆ ಮತ್ತು ಹಾಲುಣಿಸುವ ತಾಯಂದಿರಿಗೆ ವೈದ್ಯಕೀಯ ಪ್ರಮಾಣ ಪತ್ರದ ಆಧಾರದ ಮೇಲೆ ನಿಯೋಜನೆಗೆ ಅವಕಾಶ ಕಲ್ಪಿಸಿಕೊಡುವ ಬಗ್ಗೆ, ಸಿಬ್ಬಂದಿಯ ಲಭ್ಯತೆ ಆಧಾರದ ಮೇಲೆ ಅವಕಾಶ ಕಲ್ಪಿಸುವುದಾಗಿ ಆರ್. ಗಿರೀಶ್ ತಿಳಿಸಿದರು.
ಸರ್ಕಾರಿ ನೌಕರರು ಮರಣಹೊಂದಿದಾಗ ಶವಸಂಸ್ಕಾರಕ್ಕೆ ನೀಡುವ ಉಪದಾನದ ಹಣವನ್ನು ತ್ವರಿತವಾಗಿ ಮಂಜೂರು ಮಾಡಲು ಮನವಿ ಮಾಡಿದಾಗ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದರಲ್ಲದೆ, ಕೆಲವು ಇಲಾಖೆಗಳಲ್ಲಿ ವೇತನ ಬಟವಾಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಲಾಗಿ, ಮುಂದೆ ವಿಳಂಬವಾಗದಂತೆ ಕ್ರಮವಹಿಸುವುದಾಗಿ ಅವರು ಹೇಳಿದರು.
ಹೊರಗುತ್ತಿಗೆ ನೌಕರರ ಸಂಬಳದ ಪಾವತಿ ವಿಳಂಬ ಹಾಗೂ ಪ್ರಸಕ್ತ ಚಾಲ್ತಿ ಇರುವ ಟಿ.ಎ ಡಿ.ಎ ಪರಿಷ್ಕ್ಕರಣೆ ಬಗ್ಗೆ ಪ್ರಸ್ತಾಪಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಬಿ.ಎನ್ ನಂದಿನಿ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಜಿಲ್ಲಾ ಪಂಚಾಯತ್ ಉಪ ಮುಖ್ಯ ಕಾರ್ಯದರ್ಶಿ ಚಂದ್ರಶೇಖರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪ್ರಕಾಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರುಗಳಾದ ಬಿ.ಕೆ.ರುದ್ರಪ್ಪ, ಕುಮಾರಸ್ವಾಮಿ, ವೆಂಕಟೇಶ್ ಹಾಗೂ ಮತ್ತಿತರರು ಹಾಜರಿದ್ದರು.
Tags
ಹಾಸನ