ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಡಾ.ಜಿ.ಎಸ್.ಅಮೂರ ಅವರು ಇಂದು ಬೆಂಗಳೂರಿನಲ್ಲಿ ಬೆಳಗ್ಗೆ ವಿಧಿವಶರಾಗಿದ್ದಾರೆ. ಖ್ಯಾತ ಸಾಹಿತಿ, ವಿಮರ್ಶಕ ಡಾ ಜಿ.ಎಸ್.ಆಮೂರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ ಎಂ ಯಡಿಯೂರಪ್ಪ, ಲಕ್ಷ್ಮಣ್ ಸವದಿ, ಸಿ.ಟಿ.ರವಿ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ ವಿಮರ್ಶಕ ಡಾ.ಜಿ.ಎಸ್.ಅಮೂರ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ನಿಜಕ್ಕೂ ಬಡವಾಗಿದೆ. ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಡಾ.ಅಮೂರ ಎಲೆಮರೆ ಕಾಯಿಯಂತೆ ಸದ್ದುಗದ್ದಲ ಇಲ್ಲದೆ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಗಲಿಕೆಯಿಂದ ನೊಂದಿರುವ ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಡಾ.ಜಿ.ಎಸ್.ಅಮೂರ ಅವರ ಸಾವಿಗೆ ಸಂತಾಪ ಸೂಚಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ರವರು ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ ಜಿ.ಎಸ್.ಆಮೂರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ‘ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ. ಆಮೂರ ಅವರು ಕೇಂದ್ರ ಸಾಹಿತ್ಯ ಪ್ರಶಸ್ತಿ, ಪಂಪ ಪ್ರಶಸ್ತಿಗೆ ಭಾಜನರಾಗಿದ್ದರು.
ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ. ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ.
ಡಾ. ಆಮೂರ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.