ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕುರಿತು ಹೇಳಿದ ಹೇಳಿಕೆಯಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಟ ಚಿರಂಜೀವಿ ಸರ್ಜಾರ ಹೆಸರನ್ನು ಎಳೆದು ತಂದಿದ್ದರು. ಇದರ ಬಗ್ಗೆ ಸರ್ಜಾ ಕುಟುಂಬ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿತ್ತು. ಸತ್ತವರ ಬಗ್ಗೆ ಈಗ ಆರೋಪ ಮಾಡುವುದು ಸಭ್ಯತೆ ಅಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ನಟ ದರ್ಶನ್ ಕೂಡ ಸತ್ತವರ ಮೇಲೆ ಆರೋಪ ಮಾಡುವುದರಿಂದ ಅವರಿಗೆ ಶಿಕ್ಷೆ ಕೊಡುವುದಕ್ಕಾಗುತ್ತಾ ಎಂದು ಪ್ರಶ್ನಿಸಿದ್ದರು.ಆಮೇಲೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿರು ಕುರಿತ ಹೇಳಿಕೆಯನ್ನು ವಾಪಸ್ ತೆಗೆದುಕೊಂಡರು.ಚಿರಂಜೀವಿ ಸರ್ಜಾ ಯುವ ನಟರಾಗಿದ್ದು, ಆದ್ದರಿಂದಲೇ ನಾನು ಹೇಳಿದ್ದೆ. ಅವರು ಈಗ ಇದ್ದಿದ್ದರೆ ಮೇಘನಾ ಅವರು ಖುಷಿಯಿಂದ ಇರುತ್ತಿದ್ದರು. ಸತ್ತವರ ಬಗ್ಗೆ ಮಾತನಾಡಬಾರದು. ಸರ್ಜಾ ಅವರ ಬಗ್ಗೆ ನನಗೆ ಹೆಚ್ಚು ನೋವಿದೆ. ಆದರೆ ಈ ಮೂಲಕ ಹೇಳುತ್ತಿರುವುದೇನೆಂದರೇ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಡ್ರಗ್ ಮಾಫಿಯಾ ಎಂಬುವುದು ಬಹುದೊಡ್ಡದಾಗಿದೆ. ಅದನ್ನು ಸಂಪೂರ್ಣವಾಗಿ ನಿಲ್ಲಿಸಲು ಆಗದಿದ್ದರೂ ಯುವ ಜನತೆಗೆ ಒಂದು ಸಂದೇಶ ರವಾನೆ ಆಗಲಿ ಎಂಬುವುದಷ್ಟೇ ನನ್ನ ಉದ್ದೇಶ ಎಂದು ಸ್ಪಷ್ಟಪಡಿಸಿದ್ದರು.ಈಗ ಸರ್ಜಾ ಕುಟುಂಬ ಇಂದ್ರಜಿತ್ ಲಂಕೇಶ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ದತೆ ನಡೆಸಿದೆ. ಈ ಬಗ್ಗೆ ಖ್ಯಾತ ವಕೀಲರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.
Tags
ಸಿನಿಮಾ
