ಮಲೆನಾಡಿನ ರೈತರಿಗೆ ಮಹತ್ವದ ಭರವಸೆ : ನಿರ್ಮಲಾ ಸೀತಾರಾಮನ್

ಬೆಂಗಳೂರು, ಸೆ.04: ಕೊರೊನಾ ವೈರಸ್ ಹಾಗೂ ಲಾಕ್‌ಡೌನ್‌ ಸಂಕಷ್ಟದ ಬಳಿಕ ಇದೀಗ ಅತಿವೃಷ್ಠಿ ನಾಡಿನ ರೈತರನ್ನು ಕಾಡುತ್ತಿದೆ. ಮಲೆನಾಡಿನಲ್ಲಿ ಅತಿಯಾದ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಬೆಳೆ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಂಧಿಸುತ್ತಿಲ್ಲ ಎಂದು ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದೇ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಲೆನಾಡಿನ ರೈತರಿಗೆ ಮಹತ್ವದ ಭರವಸೆಯನ್ನು ಕೊಟ್ಟಿದ್ದಾರೆ.
ಮಲೆನಾಡು ಪ್ರದೇಶದ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಪ್ರದೇಶಗಳಲ್ಲಿ ಅತಿವೃಷ್ಠಿಯಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿವೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿಕರಿಗೆ ಭರವಸೆ ಕೊಟ್ಟಿದ್ದಾರೆ.

ದೆಹಲಿಯಿಂದ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಬೆಳೆಗಾರರ ಸಮಸ್ಯೆ ಕುರಿತಾದ ಆನ್‌ಲೈನ್ ವಿಡಿಯೋ ಸಂವಾದದಲ್ಲಿ ಮಾತನಾಡಿದರು.

ಬರಗಾಲದ ಬಳಿಕ ಅತಿವೃಷ್ಠಿ
ಜಿಲ್ಲೆಯು ಪರಿಸರ ಸೇರಿದಂತೆ ಹಲವು ವೈವಿದ್ಯತೆಯಿಂದ ಕೂಡಿದ್ದು, 2015 ರಿಂದ 17ರ ವರೆಗೆ ಮಳೆಯ ಕೊರತೆಯಿಂದಾಗಿ ತೀವ್ರ ಬರಗಾಲದ ಸಮಸ್ಯೆಯಿಂದಾಗಿ ಹಾಗೂ 2018-19ರಲ್ಲಿ ಸುರಿದ ಭಾರಿ ಮಳೆಯ ಅತಿವೃಷ್ಠಿ ಸಂಭವಿಸಿತ್ತು. ಹಾಗೂ ಈ ಬಾರಿ ಕೋವಿಡ್-19 ಕಾರಣದಿಂದ ಕಾಫಿ, ಮೆಣಸು, ಅಡಿಕೆ ಬೆಳಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಷಯವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದರು.

ಕಾಫಿ ಬೆಳೆಗಾರರ ಆದಾಯ ತೆರಿಗೆ
ಕಾಫಿ ಬೆಳೆಗಾರರ ಆದಾಯ ತೆರಿಗೆಗೆ ಸಂಬಂಧಿಸಿದಂತೆ ರೂಲ್ 7B(1) ನಿಯಮಾವಳಿ ಪ್ರಕಾರ ಆದಾಯ ತೆರಿಗೆ ಸಲ್ಲಿಸಬೇಕಾಗಿದ್ದು, ಆರ್ಥಿಕ ಹಿಂಜರಿತದಿಂದಾಗಿ ಇದನ್ನು ರದ್ದುಗೊಳಿಸುವಂತೆ ಮಾಡಿರುವ ಮನವಿಗೆ ಸ್ಪಂದಿಸಿದ ಸಚಿವರು ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬೆಳೆಗಾರರಿಗೆ ಭರವಸೆಯನ್ನು ಕೊಟ್ಟಿದ್ದಾರೆ.

ಜೊತೆಗೆ ತೆಂಗು ಬೆಳೆಗಾರರ ಸಮಸ್ಯೆ ಆಲಿಸಿ ಮಾತನಾಡಿದ ಕೇಂದ್ರ ಸಚಿವರು 2015-17 ರವರೆಗೆ ತೀವ್ರ ಬರಗಾಲದಿಂದ ತೆಂಗು ಬೆಳೆ ಹಾಳಾಗಿದ್ದು, ತೆಂಗು ಬೆಳೆಗೆ ಸಂಬಂಧಿಸಿದಂತೆ ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೆಂಗು ಪುನಶ್ಚೇತನ ಹಾಗೂ ನಿಗಧಿತ ಬೆಂಬಲ ಬೆಲೆಗೆ ಕ್ರಮ ವಹಿಸಲಾಗುವುದು ಎಂದರು.

ಸಂಕಷ್ಟದಲ್ಲಿ ಕೃಷಿಕರು
ಪ್ರವಾಸೋದ್ಯಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾಫಿ, ಅಡಿಕೆ, ಕಾಳುಮೆಣಸು ಸೇರಿದಂತೆ ಬಹುತೇಕ ಕೃಷಿಕರು ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರವು ಬೆಳೆ ವಿಮೆ ಫಸಲು ಭೀಮಾ, ಕಿಸಾನ್ ಸಮ್ಮಾನ್ ಯೋಜನೆ ಹಾಗೂ ರಸಗೊಬ್ಬರ ಸಬ್ಸಿಡಿ ಸೇರಿದಂತೆ ಹಲವು ರೈತ ಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಜಿಲ್ಲೆಯಲ್ಲಿ ಕಾಫಿ ಕೈಗಾರಿಕೋದ್ಯಮ ಅತಿವೃಷ್ಟಿ, ಕೋವಿಡ್-19 ಹಾಗೂ ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಿದೆ, ಇದಕ್ಕೆ ಪರಿಹಾರವಾಗಿ ಕೇಂದ್ರ ವಿತ್ತ ಸಚಿವರು ಸಮಸ್ಯೆಗಳನ್ನು ಆಳವಾಗಿ ಅರಿತಿದ್ದು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದರು.

ಶಾಸಕರು ಭಾಗಿ
ವಿಡಿಯೋ ಸಂವಾದದಲ್ಲಿ ವಿಧಾನ ಸಭಾ ಶಾಸಕ ಎಂ.ಪಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಪೂವಿತಾ, ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ಹಾಗೂ ಬೆಳೆಗಾರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post