ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ಶಿಸ್ತನ್ನು ಪಾಲಿಸುವ ಸಲುವಾಗಿ ಮತ್ತು ಪ್ರಮುಖ ಸ್ಥಳಗಳಲ್ಲಿ ವಾಹನ ನಿಲುಗಡೆ ಶುಲ್ಕವನ್ನು ಸಂಗ್ರಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಾಹನ ನಿಲುಗಡೆ ನೀತಿ ಕುರಿತಂತೆ ಉನ್ನತ ಮಟ್ಟದ ಸಭೆ ನಡೆದಿದ್ದು, ಬಳಿಕ ಸುದ್ದಿಗಾರರೊಂದಿಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮಾತನಾಡಿ, ವಾಹನ ನಿಲುಗಡೆ ಶುಲ್ಕ ಸಂಗ್ರಹಿಸುವ ಬಗ್ಗೆ ಹಾಗೂ ಇನ್ನಿತರೆ ಮಾರ್ಗಸೂಚಿಯನ್ನು ತಯಾರಿಸಿ ಕರಡು ನೀತಿಯನ್ನು ಸಿದ್ಧಪಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಿಎಂ ಸಮಿತಿ ರಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಮತ್ತು ವಾಹನಗಳನ್ನು ಎಲ್ಲೆಂದರಲ್ಲಿ ಉಚಿತವಾಗಿ ನಿಲ್ಲಿಸುವ ಪ್ರವೃತ್ತಿಗೆ ಕಡಿವಾಣ ಹಾಕಿ, ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ ನೀತಿಯನ್ನು ಜಾರಿಗೆ ತರಲಾಗುತ್ತಿದೆ.
ಪ್ರಸ್ತುತ 80ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ನಗರದ ಎಲ್ಲಾ ಕಡೆ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದು ಎಸ್. ಆರ್. ವಿಶ್ವನಾಥ್ ತಿಳಿಸಿದರು.