ಹಾಸನ: ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ (ಸಿಸಿಸಿ) ತೆರೆಯಲಾಗುವುದು ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಸನ ಜಿಲ್ಲೆ ಕೊರೋನಾ ಸೋಂಕು
ಹರಡುವಿಕೆ ಪ್ರಮಾಣದಲ್ಲಿ ಎರಡನೇ ಸ್ಥಾನದಲ್ಲಿದೆ. ಸೋಂಕು ಹರಡುವುದನ್ನು ತಡೆಯಲು ಜನತೆ
ಸಹಕರಿಸಬೇಕು ಎಂದು ಮನವಿ ಮಾಡಿದರು.
ಹಾಸ್ಟೆಲ್ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರದಲ್ಲಿ ಅಗತ್ಯ ನರ್ಸ್ , ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗುವುದು. ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ ಅವರು ದೂರವಾಣಿ ಮೂಲಕ ಸಲಹೆ, ಸೂಚನೆ ನೀಡಿದ್ದಾರೆ. ಅವರ ಅಣತಿಯಂತೆ ಎಲ್ಲ ರೀತಿಯ ಕ್ರಮ ವಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಈಗಾಗಲೇ ಸಂಬಂಧ ಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ, ಹೆಚ್ಚುವರಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಸಹಾಯವಾಣಿಯಲ್ಲಿ ಪಾಳಿ ಪ್ರಕಾರ ನಾಲ್ಕು ತಂಡಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್, ಎಸ್ಪಿ ಶ್ರೀನಿವಾಸ್ ಗೌಡ ಇದ್ದರು.