ಹಾಸನ: ಅಕ್ರಮವಾಗಿ ಯೂರಿಯಾ ರಸಗೊಬ್ಬರ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರ ಚೀಲ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೊಲೀಸರ ತಂಡ ದಾಳಿ ನಡೆಸಿ, 47 ಕೆ.ಜಿ. ತೂಕದ 97 ಯೂರಿಯಾ ಗೊಬ್ಬರದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಗತ್ಯ ವಸ್ತು ಕಾಯ್ದೆ 1955ರ ರಿತ್ಯ ಪ್ರಕರಣ ದಾಖಲಿಸಿ, ಆರೋಪಿ ಜಯಶಂಕರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಳೆಗಾಲವಾದ್ದರಿಂದ ರೈತರಿಗೆ ಸಹಜವಾಗಿ ಗೊಬ್ಬರದ ಅವಶ್ಯಕತೆಯಿದೆ. ಹೀಗಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜಾಲ ಸದ್ದಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಆಗಾಗ ಆರೋಪಗಳು ಕೇಳಿ ಬರುತ್ತಿವೆ. ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.