ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವಂತೆ ಜಿಲ್ಲಾಧಿಕಾರಿ ಕರೆ
ಹಾಸನ : ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಇನ್ನೂ ೪-೫ ದಿನದಲ್ಲಿ ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು .
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿರಡಿ ರಸ್ತೆಯಲ್ಲಿ ಇದೀಗ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನೆನ್ನೆ ನಡೆದಿದ್ದು ಇದರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಹ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೋಣಿಗಾಲ್ ಹೆದ್ದಾರಿ ಕುಸಿತವನ್ನು ಸಂಪೂರ್ಣವಾಗಿ ದುರಸ್ತಿಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿಲೋಮೀಟರ್ ಹೊಸ ರಸ್ತೆ ಮಾಡಲು 4.3 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ಮುಂದಿನ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೋಣಿಗಾಲ್ ಹೆದ್ದಾರಿ ಕುಸಿತವನ್ನು ಸಂಪೂರ್ಣವಾಗಿ ದುರಸ್ತಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಇದೀಗ ಈ ಮಾರ್ಗದಲ್ಲಿ ಏಕಮುಖ ಸಂಚಾರದಲ್ಲಿ ಲಘು ವಾಹನಗಳನ್ನು ಬಿಡಲಾಗುತ್ತಿದ್ದು ಮುಂದಿನ ನಾಲ್ಕು ಐದು ದಿನಗಳಲ್ಲಿ ಭಾರಿ ವಾಹನ ಸಂಚಾರಕ್ಕೆ ಹೆದ್ದಾರಿಯನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆದಿದೆ ಎಂದರು .
ಮಡಿಕೇರಿ ಜಿಲ್ಲೆಯಲ್ಲಿಯೂ ಸಹ 16 ಟನ್ ತೂಕದ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ ಆದ್ದರಿಂದ ಆದಷ್ಟು ಶೀಘ್ರವಾಗಿ ಭಾರಿ ವಾಹನಗಳ ಸಂಚಾರ ಶಿರಡಿ ಮಾರ್ಗದಲ್ಲಿ ಸಂಚರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
೪೨೧ ಮನೆಗೆ ಹಾನಿ..!!
ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯು ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು ಇದುವರೆಗೆ 421 ಮನೆಗಳು ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್ ಡಿ ಆರ್ ಎಫ್ ಪರಿಹಾರ ನಿಧಿಯಿಂದ ಪೂರ್ಣ ಹಾನಿಯಾದ ಮನೆಗಳಿಗೆ 5 ಲಕ್ಷ ಶೇಕಡ 25 ರಿಂದ 75% ಹಾನಿಯಾದ ಮನೆಗಳಿಗೆ 3 ಲಕ್ಷ, 15 ರಿಂದ 25% ಹಾನಿಯಾದ ಮನೆಗಳಿಗೆ 50,000 ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು .
ವಿಪರೀತ ಮಳೆಯಿಂದ ಬೆಳೆ ಹಾನಿ ಸಂಬಂಧ ಈಗಾಗಲೇ ಎಸ್ ಡಿ ಆರ್ ಎಫ್ ಮಾನದಂಡದಂತೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು ಹೆಕ್ಟರ್ ಗೆ 6,800 ಪರಿಹಾರ ಹಣವನ್ನು 10800 ಗಳಿಗೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.
33% ಬೆಳೆಹಾನಿ ಆದ ಪ್ರದೇಶಗಳಿಗೆ ಮಾತ್ರ ಪರಿಹಾರ ವಿತರಣೆ ಮಾಡಲಾಗುತ್ತಿದ್ದು ಕಾಫಿ ಬೆಳೆ ಹಾನಿ ಸಂಬಂಧ ಈಗಾಗಲೇ ಕಾಫಿ ಬೋರ್ಡ್ ಮುಖಾಂತರ ಹಾನಿ ಸಮೀಕ್ಷೆಯನ್ನು ನಡೆಸಿ ವರದಿ ನೀಡುವಂತೆ ತಿಳಿಸಲಾಗಿದ್ದು ಪರಿಹಾರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.