2023 ಡಿಸೆಂಬರ್ ವೇಳೆಗೆ ಹಾಸನದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ...!!


ನಿಲ್ದಾಣ ಕಾಮಗಾರಿ ವೀಕ್ಷಣೆ ಬಳಿಕ ಕೆಎಸ್ಐಡಿಸಿ ಅಧ್ಯಕ್ಷ ಶೈಲೇಂದ್ರ ಭರವಸೆ
ಹಾಸನ : ಮುಂದಿನ ವರ್ಷ 2023ರ ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ವಿಮಾನ ಹಾರಾಟ ಆರಂಭವಾಗಲಿದೆ ಎಂದು ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ತಿಳಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಮಾನ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೂಲಸೌಕರ್ಯ ಸಚಿವರಾದ ವಿ. ಸೋಮಣ್ಣ ಅವರು ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಯ ವಿಮಾನ ನಿಲ್ದಾಣಗಳ ಕಾಮಗಾರಿ ಅಭಿವೃದ್ಧಿ ಪರಿಶೀಲನೆ ಮಾಡಲಾಗುತ್ತಿದೆ.
ಈ ನಿಟ್ಟಿನಲ್ಲಿ ಇಂದು ಹಾಸನದ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಗೆ ಬಂದಿದ್ದು ಸಕಾರಾತ್ಮಕವಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡಲು 5.13 ಎಕರೆ ಜಮೀನಿನ ಹೆಚ್ಚುವರಿ ಅವಶ್ಯಕತೆ ಇದ್ದು ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭೂ ಮಾಲೀಕರೊಂದಿಗೆ ಮಾತುಕತೆ ಫಲಪ್ರದವಾಗಿದೆ ಎಂದರು .

೭೦ ಕೋಟಿ ಎರಡನೇ ಕಂತು ಬಿಡುಗಡೆ..!

2.2 ಕಿಮೀ ರನ್ವೆ ಹಾಗೂ ಇತರ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ 193 ಕೋಟಿ ರೂಗಳು ಈಗಾಗಲೇ ಬಿಡುಗಡೆಯಾಗಿದ್ದು 30ರಷ್ಟು ಕಾಮಗಾರಿ ಪೂರ್ಣವಾಗಿದೆ. ರಸ್ತೆ ಸಂಪರ್ಕ, ವಾಚ್ ಟವರ್ ಸೇರಿದಂತೆ ಇತರೆ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ 70 ಕೋಟಿ ರೂಗಳು ಎರಡನೇ ಕಂತು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು .
ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆ ಆಗಲಿದೆ ಹಾಗೂ ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು ಉತ್ತಮ ಸಂಪರ್ಕ ಸೇತುವಾಗಿ ನಿಲ್ದಾಣ ಅಭಿವೃದ್ಧಿಯಾಗಲಿದೆ ಎಂದರು.

ಬೀದರ್ ಹಾಗೂ ಗುಲ್ಬರ್ಗ ಮಾದರಿಯಲ್ಲಿಯೇ ಹಾಸನದಲ್ಲಿಯೂ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದ ಅವರು ಇದರಿಂದ ಹಾಸನ ಚಿಕ್ಕಮಗಳೂರು ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು .

ಹೊಯ್ಸಳ ಲಾಂಛನ ಅಳವಡಿಕೆ..!!

ವಿಮಾನ ನಿಲ್ದಾಣದ ಕಾಂಪೌಂಡ್ ಗಳ ಮೇಲೆ ಜಿಲ್ಲೆಯ ಸಂಸ್ಕೃತಿಯನ್ನು ಸಾರುವ ಹೊಯ್ಸಳ ಸಾಮ್ರಾಜ್ಯದ ಲಾಂಛನವನ್ನು ಅಳವಡಿಸಲು ಕ್ಷೇತ್ರದ ಶಾಸಕ ಪ್ರೀತಮ್ ಗೌಡ ಮನವಿ ಮಾಡಿದ್ದು ಕಾಂಪೌಂಡ್ ಗಳಿಗೆ ಲಾಂಛನ ಅಳವಡಿಸುವ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಎಕರೆಗೆ ೧.೨೦ ಕೋಟಿ ಪರಿಹಾರ..!!
ಶಾಸಕ ಪ್ರೀತಂ ಗೌಡ ಅವರು ಮಾತನಾಡಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲು 5.13 ಎಕರೆ ಭೂಮಿಗೆ ಪ್ರತಿ ಎಕರೆಗೆ 1.20ಕೋಟಿ ಹಣ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಕೆಪಿಟಿಸಿಎಲ್ ಲೈನ್ ಬದಲಾವಣೆ ಹಾಗೂ ನಿಲ್ದಾಣಕ್ಕೆ ಸಂಪರ್ಕ ರಸ್ತೆ ನಿರ್ಮಾಣ ಸಂಬಂಧ ಈಗಾಗಲೇ ಮಾತುಕತೆ ಅಂತಿಮವಾಗಿದ್ದು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದರು.

 2023 ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದ್ದು ಹಾಸನದಿಂದ ಇತರೆ ರಾಜ್ಯಗಳಿಗೆ ಉತ್ತಮ ವಿಮಾನ ನಿಲ್ದಾಣ ಸೇವೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್ .ಗಿರೀಶ್ ಉಪವಿಭಾಗಾಧಿಕಾರಿ ಬಿ.ಎ ಜಗದೀಶ್ ,ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಹಾಜರಿದ್ದರು.

Post a Comment

Previous Post Next Post