ಡಬಲ್ ಇಂಜಿನ್ ಸರ್ಕಾರಕ್ಕೆ ಕರ್ನಾಟಕದಲ್ಲಿ ಮತ್ತೊಂದು ಅವಧಿಗೆ ಅಧಿಕಾರವನ್ನು ಹಿಡಿಯುವುದು ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸಕಲ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಅದರ ಒಂದು ಅಂಗವಾಗಿ ಅರಕಲಗೂಡಿನ ಶಾಸಕ ಎ.ಟಿ. ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹಾಸನ ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದು, ಅಲ್ಲಿ ಬಿಜೆಪಿಯ ಪ್ರಭಾವ ಹೆಚ್ಚಿಸುವುದು ಬಿಜೆಪಿ ಉದ್ದೇಶವಾಗಿದ್ದು, ಅದೇ ಹಿನ್ನೆಲೆಯಲ್ಲಿ ಈಗ ಅರಕಲಗೂಡಿನ ಶಾಸಕ ಎ.ಟಿ.ರಾಮಸ್ವಾಮಿ ಅವರನ್ನು ಬಿಜೆಪಿಗೆ ಸೆಳೆದುಕೊಳ್ಳಲಾಗಿದೆ ಎನ್ನಲಾಗಿದೆ. ಇಂದು ದೆಹಲಿಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿಗೆ ಎ.ಟಿ. ರಾಮಸ್ವಾಮಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.ಆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮಾಡಿಕೊಂಡರು. 'ಅರಕಲಗೂಡಿನ ಶಾಸಕರು, ಉತ್ತಮ ಸಂಸದೀಯ ಪಟು ಶ್ರೀಎ.ಟಿ. ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರಿಗೆ ಆತ್ಮೀಯವಾದ ಸ್ವಾಗತ ಕೋರುತ್ತೇನೆ. ರಾಮಸ್ವಾಮಿ ಅವರ ಆಗಮನದಿಂದ ಹಾಸನ ಭಾಗದಲ್ಲಿ ನಮ್ಮ ಪಕ್ಷಕ್ಕೆ ಮತ್ತಷ್ಟು ಬಲ ಸಿಗಲಿದೆ' ಎಂದು ಹೇಳಿದ್ದಾರೆ.