ಶಿವಲಿಂಗೇಗೌಡರಿಗೆ ಸಚಿವ ಸ್ಥಾನ: ಆರ್ಯ ಈಡಿಗರ ಒತ್ತಾಯ

ಅರಸೀಕೆರೆ: ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಸತತ ನಾಲ್ಕನೇ ಬಾರಿಗೆ ಶಾಸಕರಾಗಿರುವ ಕೆ.ಎಂ.ಶಿವಲಿಂಗೇಗೌಡರಿಗೆ ಈ ನೂತನ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಆರ್ಯ ಈಡಿಗರ ಸಮುದಾಯ ತಾಲ್ಲೂಕು ಘಟಕದ ಒತ್ತಾಯಿಸಿದೆ.


'ಶಾಸಕ ಶಿವಲಿಂಗೇಗೌಡರು ಹಿಂದಿನಿಂದಲೂ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತ ಬಂದಿದ್ದಾರೆ, ಸಕಲ ಜಾತಿ, ಸಮುದಾಯಗಳನ್ನು ಸಮಾನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ, 15 ವರ್ಷಗಳಿಂದ ಯಾವುದೇ ದ್ವೇಷದ ರಾಜಕಾರಣ ಮಾಡಿಲ್ಲ, ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅನುಕೂಲವಾಗಲು ಅವರಿಗೆ ಸಚಿವ ಸ್ಥಾನ ನೀಡಬೇಕು' ಎಂದು ಮನವಿ ಮಾಡಿದೆ.

ಆರ್ಯ ಈಡಿಗರ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಸಿ. ಯೋಗೀಶ್ ಮಾತನಾಡಿ, 'ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಶಾಸಕ ಶಿವಲಿಂಗೇಗೌಡರ ಹಿರಿತನವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು, ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇದು ಅನುಕೂಲ ಆಗಲಿದೆ' ಎಂದರು.

ಸಮುದಾಯದ ಮುಖಂಡ ಜೆ.ಪಿ.ಎನ್. ಜಯಣ್ಣ ಮಾತನಾಡಿ, 'ಅಭಿವೃದ್ಧಿಗೆ ಹಾಗೂ ಸರ್ಕಾರಿ ಅನುದಾನ ತರುವಲ್ಲಿ ಶಾಸಕ ಶಿವಲಿಂಗೇಗೌಡ ಹೆಚ್ಚಿನ ಪಾತ್ರ ವಹಿಸುತ್ತಾರೆ, ರಾಜ್ಯದಲ್ಲಿ ಕ್ಷೇತ್ರವನ್ನು ಮಾದರಿ ಮಾಡುವುದರ ಜೊತೆಗೆ ಇಡೀ ಜಿಲ್ಲೆ ಮತ್ತು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ನಂಬಿಕೆ ಇದೆ, ಈ ನಿಟ್ಟಿನಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡಬೇಕು' ಎಂದು ಒತ್ತಾಯಿಸಿದರು.

ಸಭೆಯಲ್ಲಿ ನಗರಸಭೆ ಸದಸ್ಯ ವೆಂಕಟಮುನಿ, ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Post a Comment

Previous Post Next Post