ಹಾಸನ : ಜಿಲ್ಲೆಯಲ್ಲಿ ಕನ್ನಡ ರಥ ಯಾತ್ರೆಯನ್ನು ಸಾಂಪ್ರದಾಯಿಕ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ ಜನರ ಮನಸೆಳೆಯುವಂತೆ ಕಾರ್ಯಕ್ರಮ ಆಯೋಜಿಸುವುದರ ಮೂಲಕ ಯಶಸ್ವಿಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
![]() |
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ |
ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳು ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅವರು ಕೋರಿದ್ದಾರೆ.
ಸೆ.12 ರಂದು ಅರಕಲಗೂಡು ತಾಲ್ಲೂಕಿಗೆ ರಥ ಯಾತ್ರೆ ಆಗಮಿಸುತ್ತಿದ್ದು, 13 ರಂದು ಹೊಳೆನರಸೀಪುರ,14 ರಂದು ಚನ್ನರಾಯಪಟ್ಟಣ,15 ರಂದು ಅರಸೀಕೆರೆ 16 ರಂದು ಹಾಸನ,17 ರಂದು ಆಲೂರು,18 ರಂದು ಸಕಲೇಶಪುರ 19 ರಂದು ಬೇಲೂರು ತಾಲ್ಲೂಕು ಮಾರ್ಗವಾಗಿ ಚಿಕ್ಕಮಗಳೂರಿಗೆ ತೆರಳುತ್ತದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಅವರು ಸಭೆಯಲ್ಲಿ ಚರ್ಚಿಸಿದಂತೆ ಸೆ.16 ರಂದು ಹಾಸನದಲ್ಲಿ ರಥ ಯಾತ್ರೆಯನ್ನು ಸ್ವಾಗತ ಮಾಡಿ ಸೆ.17 ರಂದು ಬೆಳಿಗ್ಗೆ 9 ಗಂಟೆಗೆ ಡೈರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ವಿವಿಧ ಕಲಾತಂಡಗಳೊಂದಿಗೆ ರಥಯಾತ್ರೆ ಕಲಾಭವನದವರೆಗೆ ಮೆರವಣಿಗೆ ನಡೆಸಿ ನಂತರ ಆಲೂರಿಗೆ ಬೀಳ್ಕೊಡುವ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ರಥಯಾತ್ರೆ ಸಾಗುವ ಮಾರ್ಗದಲ್ಲಿ ಸಿಗುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಕನ್ನಡ ಹಬ್ಬದ ಸಡಗರ ಸಂಭ್ರಮವನ್ನು ಆನಂದಿಸುವAತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನು ಓದಿ : ಕೃಷಿಯಲ್ಲಿ ಸಾರ್ಥಕತೆ ಕಂಡುಕೊಂಡ ಯಶೋಧಮ್ಮನ ಯಶೋಗಾಥೆ
ಮೆರವಣಿಗೆಯಲ್ಲಿ ಸ್ಥಳೀಯ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಸಾಮೂಹಿಕವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು. ಮಹಿಳೆಯರಿಂದ ಪೂರ್ಣ ಕುಂಭ ಮೆರವಣಿಗೆ ಹಾಗೂ ದ್ವಿಚಕ್ರ ವಾಹನ ರಾಲಿ ಆಟೋಗಳು ಮೆರವಣಿಗೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ವಿನೂತನವಾಗಿ ಮೂಡಿಬರುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ರಥಯಾತ್ರೆಯಲ್ಲಿ ಜನಪ್ರತಿನಿಧಿಗಳು ಭಾಗವಹಿಸಲು ಆಹ್ವಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕನ್ನಡ ಭಾಷೆಯ ಮೇಲಿನ ಪ್ರೀತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಹೆಚ್.ಎಲ್.ಮಲ್ಲೇಶ್ ಗೌಡ, ಕನ್ನಡಪರ ಸಂಘಟನೆಗಳ ಮುಖಂಡರಾದ ಬಿ.ಜೆ. ಗೋಪಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ತಾರಾನಾಥ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.